ಕನ್ನಡ ನಾಡು | Kannada Naadu

ಮೇ 30, 31 ರಂದು  ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಣಧಿಕಾರಿಗಳು  ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆಯಲು ಮುಖ್ಯ ಕಾರ್ಯದರ್ಶಿಗಳಿಗೆ  ಮುಖ್ಯಮಂತ್ರಿಗಳಿಂದ ಸೂಚನೆ

28 May, 2025

 

ಬೆಂಗಳೂರು  : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ  ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸುವುದು.

ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು, ಮೇ 30, 31 ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ತೆಗೆದುಕೊಂಡಿರುವ ಕ್ರಮಗಳು :

ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.  

ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ ಎಂದು ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

Publisher: ಕನ್ನಡ ನಾಡು | Kannada Naadu

Login to Give your comment
Powered by