CreamA Cream article
Article

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆರಂಭ

ಕನ್ನಡ ನಾಡು


   ಉಡುಪಿ: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ - 2024 ಅಂಗವಾಗಿ ಮಂಗಳವಾರ ಅಜ್ಜರಕಾಡುವಿನ ನಗರ ಕೇಂದ್ರ ಗ್ರಂಥಾಲಯದ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಜರಗಿದವು.
       ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಕ್ಕಳಿಗೆ ಪಠ್ಯ ಪುಸ್ತಕಗಳೊಂದಿಗೆ ಪಠ್ಯೇತರ ಪುಸ್ತಕಗಳನ್ನು ಓದುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಗ್ರಂಥಾಲಯದಲ್ಲಿ ಇಂತಹ ಚಟುವಟಿಕೆಗಳನ್ನು ಏರ್ಪಡಿಸಿರುವುದು ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಕುರಿತು ಆಸಕ್ತಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದರು.

    ಸಾಹಿತಿ ಹಾಗೂ ಶಾರದ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಜಾನ್ಸನ್ ಮಾತನಾಡಿ, ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯಾರ್ಥಿಗಳು ಪುಸ್ತಕದ ಜೊತೆ ಗೆಳೆತನ ಮಾಡಬೇಕು ಓದುವ ಹವ್ಯಾಸವನ್ನು ಮಕ್ಕಳು ರೂಡಿಸಿಕೊಳ್ಳಬೇಕು ಎಂದರು.
ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾವಂಕರ್ ಮಾತನಾಡಿ, ಬಾಲ್ಯದಿಂದಲೇ ಮಕ್ಕಳು ಕಥೆಗಳನ್ನು ಓದಬೇಕು. ಮುಂದೆ ಓದುವ ಹವ್ಯಾಸದಿಂದ ಕಥೆಗಳನ್ನು ಬರೆಯುವಂತಹ ಪ್ರವೃತ್ತಿ ಬೆಳೆಯುತ್ತದೆ ಜ್ಙಾನ ದೇಗುಲವಾಗಿರುವ ಈ ಗ್ರಂಥಾಲಯವು ಮುಂದಿನ ಭವಿಷ್ಯ ರೂಪಿಸಲು ವೇದಿಕೆಯಾಗಿದೆ ಎಂದರು.
       ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕಿ ರಂಜಿತ ಸಿ. ನಿರೂಪಿಸಿದರು. ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು. ಸುಮಾರು 75 ಕ್ಕಿಂತ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Read More