ಕನ್ನಡ ನಾಡು | Kannada Naadu

ಮಾಜಿ ಮುಖ್ಯಮಂತ್ರಿ  ಎಸ್.ಎಂ. ಕೃಷ್ಣ ನಿಧನ: ರಾಜ್ಯಪಾಲರ ಸಂತಾಪ

10 Dec, 2024

 

ಬೆಂಗಳೂರು : "ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಯಲ್ಲಿ ಮಹತ್ವಪೂರ್ಣ ಕಾರ್ಯಗಳನ್ನು ಕೈಗೊಂಡು, ಕೇಂದ್ರ ಸಚಿವರಾಗಿ, ರಾಜ್ಯದ ಮಂತ್ರಿಯಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ವರ್ಗಕ್ಕೆ ಅತೀವ ಸಂತಾಪಗಳು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ" ಎಂದು ರಾಜ್ಯಪಾಲರು ಸಂತಾಪ ಸೂಚಿಸಿದ್ದಾರೆ.

 

ಎಸ್ ಎಂ ಕೃಷ್ಣ ನಿಧನ: ಅಂತಿಮ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್


ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.

ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು, ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಎಸ್.ಎಂ. ಕೃಷ್ಣ ಅವರ ಕುಟುಂಬಸ್ಥರಿಗೆ ರಾಜ್ಯಪಾಲರ ಸಾಂತ್ವನ ಹೇಳಿದ್ದಾರೆ.

ನಂತರ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರು, "ಎಸ್.ಎಂ. ಕೃಷ್ಣರವರು ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಕುಂಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

Publisher: ಕನ್ನಡ ನಾಡು | Kannada Naadu

Login to Give your comment
Powered by